Saturday 26 September 2015

ಹಣತೆ


ಜಿ.ಎಸ್.ಶಿವರುದ್ರಪ್ಪ
ಹಣತೆ ಹಚ್ಚುತ್ತೇನೆ ನಾನೂ
ಈ ಕತ್ತಲನ್ನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ;
ಲೆಕ್ಕವೇ ಇರದ ದೀಪಾವಳಿಯ ಹಡಗುಗಳೇ
ಇದರಲ್ಲಿ ಮುಳುಗಿ ಕರಗಿರುವಾಗ
ನಾನು ಹಚ್ಚುವ ಹಣತೆ ಶಾಶ್ವತವೆಂಬ ಭ್ರಮೆ ನನಗಿಲ್ಲ

ಹಣತೆ ಹಚ್ಚುತ್ತೇನೆ ನಾನೂ;
ಈ ಕತ್ತಲಿನಿಂದ ಬೆಳಕಿನ ಕಡೆಗೆ ನಡೆದೇನೆಂಬ
ಆಸೆಯಿಂದಲ್ಲ.
ಕತ್ತಲಿನಿಂದ ಕತ್ತಲೆಗೇ ತಡಕಾಡಿಕೊಂಡು ಬಂದಿವೆ ಹೆಜ್ಜೆ
ಶತಮಾನದಿಂದಲೂ,

ನಡುನಡುವೆ ಒಂದಷ್ಟು ಬೆಳಕು ಬೇಕೆಂದು
ಆಗಾಗ ಕಡ್ಡಿ ಗೀಚಿದ್ದೇವೆ,
ದೀಪ ಮೂಡಿಸಿದ್ದೇವೆ,
ವೇದ,ಶಾಸ್ತ್ರ,ಪುರಾಣ,ಇತಿಹಾಸ,ಕಾವ್ಯ,ವಿಜ್ಞಾನಗಳ
ಮತಾಪು-ಪಟಾಕಿ-ಸುರು ಸುರುಬತ್ತಿ-ಹೂ ಬಾಣ
ಸುಟ್ಟಿದ್ದೇವೆ.
'ತಮಸೋಮ ಜ್ಯೋತಿರ್ಗಮಯ' ಎನ್ನುತ್ತಾ ಬರೀ
ಬೂದಿಯನ್ನೇ ಕೊನೆಗೆ ಕಂಡಿದ್ದೇವೆ

ನನಗೂ ಗೊತ್ತು,ಈ ಕತ್ತಲಿಗೆ
ಕೊನೆಯಿರದ ಬಾಯಾರಿಕೆ.
ಎಷ್ಟೊಂದು ಬೆಳಕನ್ನು ಇದು ಉಟ್ಟರೂ,ತೊಟ್ಟರೂ
ತಿಂದರೂ,ಕುಡಿದರೂ ಇದಕ್ಕೆ ಇನ್ನೂ ಬೇಕು
ಇನ್ನೂ ಬೇಕು ಎನ್ನು ಬಯಕೆ

ಆದರೂ ಹಣತೆ ಹಚ್ಚುತ್ತೇನೆ ನಾನೂ;
ಕತ್ತಲೆಯನ್ನು ದಾಟುತ್ತೇನೆಂಬ ಭ್ರಮೆಯಿಂದಲ್ಲ,
ಇರುವಷ್ಟು ಹೊತ್ತು ನಿನ್ನ ಮುಖ ನಾನು,ನನ್ನ ಮುಖ ನೀನು
ನೋಡಬಹುದೆಂಬ ಒಂದೇ ಒಂದು ಆಸೆಯಿಂದ
ಹಣತೆ ಬೇಗ ಆರಿದ ಮೇಲೆ,ನೀನು ಯಾರೋ, ಮತ್ತೆ
ನಾನು ಯಾರೋ.
                     

         
                                                    

                                                       ************

  { ವಾಸ್ತವತೆಯನ್ನು ಪ್ರತಿಪಾದಿಸುವ ಈ ಕವಿತೆ ನಮ್ಮ ಪಠ್ಯದಲ್ಲಿದೆ. ಇದನ್ನು ಓದಿದ ನಂತರ ಯಾಕೋ ಬಹಳ ಕಾಡತೊಡಗಿತು,ಹಂಚಿಕೊಳ್ಳಬೇಕೆನಿಸಿತು. . }

No comments:

Post a Comment